
ಪ್ರತಿಧ್ವನಿ ಯಲ್ಲಾಪುರ : ಸಾರ್ವಜನಿಕರ ಆರೋಗ್ಯ ರಕ್ಷಣೆಯ ನೆಪವೊಡ್ಡಿ ಕರ್ನಾಟಕ ರಾಜ್ಯ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪಾದನೆ, ಸಂಗ್ರಹಣೆ, ವಿತರಣೆ ಹಾಗೂ ಮಾರಾಟದ ಮೇಲೆ ನಿಷೇಧ ಹೇರಿರುವ ಕ್ರಮವು, ಲಕ್ಷಾಂತರ ಅಡಿಕೆ ಬೆಳೆಗಾರರ ಮತ್ತು ಕಾನೂನುಬದ್ಧ ವ್ಯಾಪಾರಸ್ಥರ ಹೊಟ್ಟೆಯ ಮೇಲೆ ಹೊಡೆಯುವ ನಿರ್ಧಾರವಾಗಿದೆ. ಸರ್ಕಾರದ ಈ ರೀತಿಯ ನಡೆಯಿಂದಾಗಿ ಅಡಿಕೆ ಬೆಳೆಯನ್ನೇ ನಂಬಿ ಬದುಕುತ್ತಿರುವ ಕೃಷಿಕರ ಬದುಕಿಗೆ ಕೊಳ್ಳಿ ಇಟ್ಟಂತಾಗಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾದ್ಯಮ ಪ್ರಕಟಣೆ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಅಡಿಕೆಯು ಕರ್ನಾಟಕ ಹಾಗೂ ದೇಶದ ಲಕ್ಷಾಂತರ ಕೃಷಿಕ ಕುಟುಂಬಗಳ ಜೀವನಾಡಿಯಾದ ಪ್ರಮುಖ ತೋಟಗಾರಿಕಾ ಬೆಳೆಯಾಗಿದೆ. ತಂಬಾಕು ಮತ್ತು ನಿಕೋಟಿನ್ನಂತಹ ಹಾನಿಕಾರಕ ಅಂಶಗಳನ್ನು ಒಳಗೊಂಡ ನಿಷೇಧಿತ ಉತ್ಪನ್ನಗಳ ಸಾಲಿನಲ್ಲಿ ಕೃಷಿ ಉತ್ಪನ್ನವಾದ ಅಡಿಕೆಯನ್ನು ಸೇರಿಸಿ, ಸರ್ಕಾರವು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ತೀವ್ರ ಖಂಡನೀಯ.

ಈಗಾಗಲೇ ಹವಾಮಾನ ವೈಪರೀತ್ಯ ಹಾಗೂ ರೋಗಬಾಧೆಯಿಂದ ಕಂಗಾಲಾಗಿರುವ ರೈತರಿಗೆ ರಾಜ್ಯ ಸರ್ಕಾರದ ಈ ಕ್ರಮವು ‘ಗಾಯದ ಮೇಲೆ ಬರೆ ಎಳೆದಂತಾಗಿದೆ’. ಹಾಗೆಯೇ, ಕೇವಲ ಇದನ್ನೇ ನಂಬಿ ಬದುಕುತ್ತಿರುವ ಸಣ್ಣ ಸಣ್ಣ ವ್ಯಾಪಾರಸ್ಥರಿಗೂ ಸಹ ಭಾರಿ ತೊಂದರೆಯುಂಟಾಗಿದೆ.
ಈಗಾಗಲೇ ಗುಟ್ಕಾ ನಿಷೇಧ ಜಾರಿಯಲ್ಲಿದ್ದು, ಈಗ ಪಾನ್ ಮಸಾಲಾವನ್ನೂ ನಿಷೇಧಿಸಿರುವುದು ರೈತರ ಮೇಲಿನ ಗದಾಪ್ರಹಾರವಾಗಿದೆ.
ಆರೋಗ್ಯ ರಕ್ಷಣೆಯ ನಿಯಮಗಳನ್ನು ಜಾರಿಗೆ ತರುವಾಗ, ಅಡಿಕೆ ಬೆಳೆಯುವ ರೈತರಿಗೆ ಮತ್ತು ವ್ಯಾಪಾರಿಗಳ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಜಾಗ್ರತೆ ವಹಿಸುವುದು ಸರ್ಕಾರದ ಪ್ರಾಥಮಿಕ ಕರ್ತವ್ಯವಾಗಿತ್ತು.
ಆದ್ದರಿಂದ, ರಾಜ್ಯ ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ತಂಬಾಕು ಉತ್ಪನ್ನಗಳು ಮತ್ತು ಸಕ್ರಮ ಅಡಿಕೆಯ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸಬೇಕು. ಅಡಿಕೆ ಬೆಳೆಗಾರರಿಗೆ, ಅದರ ಸಾಗಾಣಿಕೆಗೆ ಹಾಗೂ ಕಾನೂನುಬದ್ಧ ವ್ಯಾಪಾರಿಗಳಿಗೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಸ್ಪಷ್ಟವಾದ ನಿಯಮಾವಳಿಗಳನ್ನು ರೂಪಿಸಬೇಕು. ರಾಜ್ಯದ ಲಕ್ಷಾಂತರ ರೈತ ಕುಟುಂಬಗಳ ಜೀವನಧಾರವಾಗಿರುವ ಅಡಿಕೆ ಬೆಳೆ ಹಾಗೂ ಸಕ್ರಮ ವ್ಯಾಪಾರಿಗಳ ಹಿತರಕ್ಷಣೆಗೆ ಸರ್ಕಾರವು ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು




















Prathidvani Yellapura