
ಪ್ರತಿಧ್ವನಿ ಯಲ್ಲಾಪುರ : ಮತದಾರರ ಪಟ್ಟಿಯು ನಿಖರ ಹಾಗೂ ದೋಷರಹಿತವಾಗಿರುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಆರ್. ಕಾರ್ಯವನ್ನು ಜವಾಬ್ದಾರಿಯುತವಾಗಿ ಹಾಗೂ ಪಾರದರ್ಶಕವಾಗಿ ಕೈಗೊಳ್ಳಬೇಕಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ಕಾಳಜಿ ವಹಿಸುವಂತೆ ಅಧಿಕಾರಿಗಳು ಹಾಗೂ ಬಿ.ಎಲ್.ಎ.-2 ಪ್ರತಿನಿಧಿಗಳಿಗೆ ನಿರ್ದೇಶನ ನೀಡಿದ್ದು ಎಸ್.ಐ.ಆರ್ ಪ್ರಕ್ರಿಯೆ ಯಶಸ್ವಿಯಾಗಲಿ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.



ತಅವರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಯಲ್ಲಾಪುರ ತಾಲೂಕಿನ ಕುಂದರಗಿ, ಹಿತ್ಲಳ್ಳಿ ಹಾಗೂ ಉಮ್ಮಚಗಿ, ಹಾಸಣಗಿ, ಕಂಪ್ಲಿ ಗ್ರಾಮಗಳಲ್ಲಿ ಎಸ್.ಐ.ಆರ್. ಸಭೆಗಳನ್ನು ನಡೆಸಿ ಮಾತನಾಡಿದರು.

ಸಭೆಗಳಲ್ಲಿ ಆಯಾ ವ್ಯಾಪ್ತಿಗೆ ಸಂಬಂಧಿಸಿದ ಬಿ.ಎಲ್.ಎ.-2 ಪ್ರತಿನಿಧಿಗಳಿಂದ ಬೂತ್ವಾರು ಮಾಹಿತಿಯನ್ನು ಪಡೆದು ಪರಿಶೀಲಿಸಿದ ಶಾಸಕರು, ಎಸ್.ಐ.ಆರ್. ಪ್ರಕ್ರಿಯೆಯ ಪ್ರಗತಿ, ಮತದಾರರ ಪಟ್ಟಿಯ ಪರಿಷ್ಕರಣೆ, ಹೊಸ ಮತದಾರರ ನೋಂದಣಿ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ದಾಖಲೆಗಳ ಕುರಿತು ಸಮಗ್ರ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಪದಾಧಿಕಾರಿಗಳು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಬಿ.ಎಲ್.ಎ.-2 ಪ್ರತಿನಿಧಿಗಳು ಉಪಸ್ಥಿತರಿದ್ದರು.










Prathidvani Yellapura