
ಪ್ರತಿಧ್ವನಿ ಯಲ್ಲಾಪುರ: ತಾಲೂಕಿನ ಇಡುಂದಿ ವಿಶ್ವ ದರ್ಶನ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ,” ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ” ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗೂಗಲ್ ಮೀಟ್ ಮೂಲಕ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು, ಸಮಾಜಕ್ಕೆ ಆದರ್ಶ ಪ್ರಜೆಗಳಾಗುವಂತೆ ಪ್ರೇರಣಾದಾಯಕ ಸಂದೇಶ ನೀಡಿದರು. ಈ ಕಾರ್ಯಕ್ರಮವು ಗೂಗಲ್ ಮೀಟ್ ಮೂಲಕ ರಾಜ್ಯದ 1,154ಕ್ಕೂ ಹೆಚ್ಚು ಶಾಲಾ–ಕಾಲೇಜುಗಳು ಹಾಗೂ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭಾಗವಹಿಸುವಿಕೆಯಿಂದ ನಡೆಯಿತು.

ಹೇಮಾವತಿ ವಿ. ಹೆಗ್ಗಡೆ ಅವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ, ಯಾವುದೇ ರೀತಿಯ ವ್ಯಸನದಿಂದ ದೂರವಿದ್ದು ಆರೋಗ್ಯಕರ, ಶಿಸ್ತುಬದ್ಧ ಹಾಗೂ ಮೌಲ್ಯಯುತ ಜೀವನವನ್ನು ನಡೆಸುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಎಚ್. ಎನ್. ವೆಂಕಟೇಶ್ ಪ್ರಸನ್ನ, ಪೊಲೀಸ್ ಅಧಿಕಾರಿ
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ವಿವಿಧ ಮಾದಕ ವಸ್ತುಗಳ ಬಳಕೆ, ಅವುಗಳ ದುಷ್ಪರಿಣಾಮಗಳು ಹಾಗೂ ಮೆದುಳು, ದೇಹ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಗಂಭೀರ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿ ಜೀವನ ಮತ್ತು ಯುವ ಸಮೂಹವೇ ದೇಶದ ಅಮೂಲ್ಯ ಶಕ್ತಿಯಾಗಿದ್ದು, ಆ ಶಕ್ತಿಯನ್ನು ಸಕಾರಾತ್ಮಕ ದಾರಿಯಲ್ಲಿ ಬಳಸಿಕೊಂಡು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವಂತೆ ಹಾಗೂ ಜವಾಬ್ದಾರಿಯುತ ನಾಗರಿಕರಾಗುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಹೆಗಡೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಡಿ. ಎನ್. ಗೌಂಕರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಅಧಿಕಾರಿ ಸಂತೋಷ್ ಹಾಗೂ ಶಾಲೆಯ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಹಾಂತ್ಯ.ಮತ್ತು ಸೇವಾ ಪ್ರತಿನಿಧಿ ರಾಜೀವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



ಈ ಜಾಗೃತಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಮಗ್ರ ಅರಿವು ಪಡೆದು, ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಉತ್ತಮ ಭವಿಷ್ಯ ರೂಪಿಸುವ ಸಂಕಲ್ಪ ಕೈಗೊಂಡರು……










Prathidvani Yellapura