
ಪ್ರತಿಧ್ವನಿ ಯಲ್ಲಾಪುರ : ಪ್ರತಿಯೊಬ್ಬರಿಗೂ ಸುರಕ್ಷಿತ ಹಾಗೂ ಗೌರವಯುತ ವಸತಿ ಸೌಲಭ್ಯ ಒದಗಿಸುವುದು ತಮ್ಮ ಸಂಕಲ್ಪವಾಗಿದ್ದು, ಬಡವರ ಬದುಕಿನಲ್ಲಿ ನೆಮ್ಮದಿ ಮತ್ತು ಭದ್ರತೆಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಹೆಜ್ಜೆಯಾಗಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಸೋಮವಾರ ಹೆಬ್ಬಾರ್ ನಗರದಲ್ಲಿ ವಸತಿ ರಹಿತ ಬಡ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ಮಹತ್ವಾಕಾಂಕ್ಷೆಯ ಉದ್ದೇಶದೊಂದಿಗೆ ಹೆಬ್ಬಾರ್ ನಗರದಲ್ಲಿ ನಿರ್ಮಿಸಲಾಗಿರುವ ಜಿ+2 ಮಾದರಿಯ ಮನೆಗಳ ಮೊದಲ ಹಂತದ ಹಂಚಿಕೆ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದರು.

ಶಾಸಕ ಶಿವರಾಮ ಹೆಬ್ಬಾರ್ ಅವರ ಬಡವರ ಮೇಲಿನ ಕಾಳಜಿ ಮತ್ತು ಸರ್ಕಾರ ಮಟ್ಟದಲ್ಲಿ ಸತತ ಪ್ರಯತ್ನದ ಫಲವಾಗಿ ಹೆಬ್ಬಾರ್ ನಗರ ತಲೆ ಎತ್ತಿದೆ.
ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿನ ಸುಮಾರು 10 ಎಕರೆ ಪ್ರದೇಶವನ್ನು ಗುರುತಿಸಿ ಬಡವರಿಗಾಗಿ ಸುಮಾರು 500 ಕ್ಕು ಅಧಿಕ ಮನೆಗಳನ್ನು ಸ್ಲಂ ಬೋಡ್೯ ಅಡಿಯಲ್ಲಿ ನಿರ್ಮಿಸಿದ್ದು ಮನೆ ಇಲ್ಲದ ಬಡವರಿಗೆ ಸರ್ಕಾರ ನಿಗದಿಪಡಿಸಿದ ಹಣ ಪಾವತಿಸಿ ಸ್ವಂತ ಸೂರು ತಮ್ಮದಾಗಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ.

ಪಟ್ಟಣದ ಹೆಬ್ಬಾರ್ ನಗರದ ಕಾರ್ಮಿಕ ಭವನದಲ್ಲಿ ಆಯೋಜಿಸಲಾದ ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಶಿವರಾಮ ಹೆಬ್ಬಾರ್ ಅವರು ಅರ್ಹ ಫಲಾನುಭವಿಗಳಿಗೆ ಮನೆಗಳ ಆದೇಶ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.




ಹೆಬ್ಬಾರ್ ನಗರದಲ್ಲಿ ನಿರ್ಮಾಣಗೊಂಡಿರುವ ಜಿ+2 ಮಾದರಿಯ ಮನೆಗಳು ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದ್ದು, ಅರ್ಹ ಫಲಾನುಭವಿಗಳ ಜೀವನದಲ್ಲಿ ಹೊಸ ಆಶಾಕಿರಣ ಮೂಡಿಸಲಿವೆ. ಸರ್ಕಾರದ ವಿವಿಧ ವಸತಿ ಯೋಜನೆಗಳ ಸದುಪಯೋಗವನ್ನು ಜನರಿಗೆ ತಲುಪಿಸುವ ಮೂಲಕ ಪ್ರತಿಯೊಬ್ಬ ಕುಟುಂಬಕ್ಕೂ ಸ್ವಂತ ಸೂರು ಕಲ್ಪಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.




ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದು, ಮನೆಗಳ ಹಂಚಿಕೆ ಪ್ರಕ್ರಿಯೆ ಯಶಸ್ವಿಯಾಗಿ ನೆರವೇರಿತು.
















Prathidvani Yellapura