
ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲೇ ಅತಿ ಹೆಚ್ಚು ಬಿಎಸ್ಎನ್ಎಲ್ ಟವರ್ಗಳು ನಮ್ಮ ಜಿಲ್ಲೆಯಲ್ಲಿದ್ದು, ಅವುಗಳ ನಿರ್ವಹಣೆ ಹಾಗೂ ಹೊಸ ಟವರ್ಗಳ ನಿರ್ಮಾಣ ಕಾರ್ಯದಲ್ಲಿ ಎದುರಾಗುತ್ತಿರುವ ತೊಡಕುಗಳನ್ನು ಆದಷ್ಟು ಬೇಗ ನಿವಾರಿಸಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬಿ.ಎಸ್.ಎನ್.ಎಲ್ ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ (GM) ಶ್ರೀ ಬೋರಾಲೇ ಹೇಮಂತ್ ಸದಾಶಿವ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಖಡಕ್ ಆದೇಶ ನೀಡಿದರು.

ಜಿಲ್ಲೆಯಾದ್ಯಂತ ಎದುರಾಗುತ್ತಿರುವ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಶಿರಸಿಯ ಕಚೇರಿಯಲ್ಲಿ ಬಿಎಸ್ಎಲ್ಎಲ್ ಅಧಿಕಾರಿಗಳ ಸಭೆ ನಡೆಸಿ ಹೇಳಿದರು.

ಟವರ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದ ಅವರು, ಪ್ರತಿ ತಿಂಗಳಿಗೊಮ್ಮೆ ಕಾಮಗಾರಿ ಹಾಗೂ ನಿರ್ವಹಣೆ ಕುರಿತು ಸಮಗ್ರ ವರದಿ ನೀಡುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು.

ನೆಟ್ವರ್ಕ್ ಸಮಸ್ಯೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಕ್ಷಣವೇ ಸರಿಪಡಿಸಲು ಅಗತ್ಯವಿರುವ ತಂತ್ರಜ್ಞರು ಮತ್ತು ಯಂತ್ರೋಪಕರಣಗಳು ಜಿಲ್ಲೆಯಲ್ಲೇ ಸದಾ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಲಾಯಿತು. ಜಿಲ್ಲೆಯಲ್ಲಿ ಇನ್ನೂ ಅನೇಕ ಟವರ್ಗಳು 4G ಉನ್ನತೀಕರಣಗೊಳ್ಳಬೇಕಿದ್ದು, ಅದಕ್ಕೆ ಬೇಕಾಗುವ ಸಲಕರಣೆಗಳನ್ನು ತಕ್ಷಣವೇ ತರಿಸಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದ ಸಂಸದರು, ಈ ಸಂಬಂಧ ಸ್ಥಳೀಯ ಅಧಿಕಾರಿಗಳೊಂದಿಗೆ ಮಾತ್ರವಲ್ಲದೆ ಈಗಾಗಲೇ ಬೆಂಗಳೂರು ಮತ್ತು ನವದೆಹಲಿಯ ಉನ್ನತ ಅಧಿಕಾರಿಗಳೊಂದಿಗೂ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.










Prathidvani Yellapura