
ಪ್ರತಿಧ್ವನಿ ಯಲ್ಲಾಪುರ: ಪ್ರತಿಯೊಬ್ಬ ವ್ಯಕ್ತಿಯು ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವ ಉಳಿಸುವ ಪುಣ್ಯದ ಕೆಲಸದಲ್ಲಿ ಭಾಗಿಗಳಾಗಬೇಕು. ಯುವಜನತೆ ಇಂತಹ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ.ಮಾನವಿಯತೆಯ ಸಾಕಾರವೆ ರಕ್ತ ದಾನ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ಡಿ. ಜನಾರ್ದನ್ ಹೇಳಿದರು.

ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕ 1 ಮತ್ತು 2 ಹಾಗೂ ಕ್ರಿಯೇಟಿವ್ ಕಂಪ್ಯೂಟರ್ ಇನ್ಸ್ಟಿಟ್ಯೂಟ್ ಯಲ್ಲಾಪುರ ಇವರ ಜಂಟಿ ಸಹಯೋಗದಲ್ಲಿ, ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ಇವರ ತಾಂತ್ರಿಕ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಜೀವ ಉಳಿಸುವಲ್ಲಿ ರಕ್ತದಾನದ ಮಹತ್ವ:
ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿಗಳು ಹಾಗೂ ಕ್ರಿಯೇಟಿವ್ ಕಂಪ್ಯೂಟರ್ಸ್ನ ನಿರ್ದೇಶಕರಾದ ಶ್ರೀ ಶ್ರೀನಿವಾಸ್ ಮುರ್ಡೇಶ್ವರ ಅವರು ಮಾತನಾಡಿ, “ಶಿಕ್ಷಣದ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದು ನಮ್ಮ ಸಂಸ್ಥೆಯ ಉದ್ದೇಶವಾಗಿದೆ. ಇಂದಿನ ದಿನಗಳಲ್ಲಿ ಅಪಘಾತಗಳು ಹಾಗೂ ತುರ್ತು ಚಿಕಿತ್ಸೆಗಳ ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಎಷ್ಟೋ ಜೀವಗಳು ಅಪಾಯಕ್ಕೆ ಸಿಲುಕುತ್ತಿವೆ. ಅಂತಹ ಸಂದರ್ಭಗಳಲ್ಲಿ ಈ ಶಿಬಿರದ ಮೂಲಕ ಸಂಗ್ರಹವಾಗುವ ರಕ್ತವು ಆಸರೆಯಾಗಲಿದೆ,” ಎಂದು ತಿಳಿಸಿದರು.
ರಕ್ತದಾನದಲ್ಲಿನ ತಪ್ಪು ಕಲ್ಪನೆಯನ್ನು ಹೋಗಲಾಡಿಸಿ : ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಿಮ್ಸ್ನ ವೈದ್ಯಕೀಯ ಅಧಿಕಾರಿ ಡಾ. ಮಾಲಿನಿ ಅವರು ರಕ್ತದಾನದ ಕುರಿತಾದ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲಾಗುವ ಧನಾತ್ಮಕ ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಐಕ್ಯೂಎಸಿ (IQAC) ಸಂಚಾಲಕರಾದ ಡಾ. ಓಂ ಪ್ರಕಾಶ್ ನಾಯಕ್ ಅವರು ಕಾರ್ಯಕ್ರಮದ ಆಶಯದ ಕುರಿತು ಮಾತನಾಡಿದರು. ಯೂತ್ ರೆಡ್ ಕ್ರಾಸ್ ಸಂಚಾಲಕ ಡಾ. ರವಿ ಶೇಷಗಿರಿ ಅವರು ಶಿಬಿರದ ಯಶಸ್ವಿಗೆ ಕಾರಣರಾದ ಎಲ್ಲರನ್ನು ಸ್ವಾಗತಿಸಿ, ವಂದಿಸಿದರು.

ಬೆಳಿಗ್ಗೆಯಿಂದಲೇ ಆರಂಭವಾದ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಸರತಿಯ ಸಾಲಿನಲ್ಲಿ ನಿಂತು ರಕ್ತದಾನ ಮಾಡಿದ್ದು ವಿಶೇಷವಾಗಿತ್ತು. ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲದೆ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ಯಲ್ಲಾಪುರದ ನಾಗರಿಕರು ಕೂಡ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು. ಕಿಮ್ಸ್ ಆಸ್ಪತ್ರೆಯ ನುರಿತ ತಜ್ಞರ ತಂಡವು ರಕ್ತ ಸಂಗ್ರಹಣೆಯ ಮೇಲ್ವಿಚಾರಣೆಯನ್ನು ನಡೆಸಿತು. ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಎನ್.ಎಸ್.ಎಸ್ ಸ್ವಯಂಸೇವಕರು ಹಾಗೂ ಕ್ರಿಯೇಟಿವ್ ಕಂಪ್ಯೂಟರ್ ಇನ್ಸ್ಟಿಟ್ಯೂಟ್ನ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.







Prathidvani Yellapura